ದಾವಣಗೆರೆ (Davanagere): ಮಕ್ಕಳು ನಮ್ಮ ಸಂಪತ್ತಾಗಿದ್ದು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮಕ್ಕಳ ಸಹಾಯವಾಣಿಗೆ ಸಂಪರ್ಕಿಸುವಂತೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣ ಎಂ.ಕೊಳ್ಳ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರಾ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳಿಗೆ ಏರ್ಪಡಿಸಲಾದ “ಮಕ್ಕಳ ಸಂರಕ್ಷಣಾ ಕಾಯ್ದೆ”ಗಳು ಹಾಗೂ ಮಕ್ಕಳೊಂದಿಗೆ ನಡೆಸಿದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.
ಮಕ್ಕಳಿಗೆ ಸಂಬಂಧಿಸಿದ ಯಾವುದೇ ಅಹಿತಕರ ಘಟನೆಗಳು ನಡೆದಿದ್ದಲ್ಲಿ ಅಥವಾ ಕಂಡುಬಂದಲ್ಲಿ ಕೂಡಲೇ ಮಕ್ಕಳ ಸಹಾಯವಾಣಿ 1098 ಹಾಗೂ 112 ಕರೆ ಮಾಡಬೇಕು. ತಕ್ಷಣ ಮಕ್ಕಳ ಸಂರಕ್ಷಣೆ ಮಾಡಲು ಕಾರ್ಯಪ್ರವೃತ್ತರಾಗುವುದು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳ ಆದ್ಯ ಕರ್ತವ್ಯ ವಾಗಿರುತ್ತದೆ. ಮಕ್ಕಳು ಪ್ರತಿ ದಿನ ಶಾಲೆಗೆ, ಕಾಲೇಜಿಗೆ ಹೋಗಲು ಬಸ್ ವ್ಯವಸ್ಥೆ ಕಲ್ಪಿಸಿಕೊಡಲು ಹಾಗೂ ಹಾಸ್ಟೆಲ್ ಗಳಲ್ಲಿ ಗ್ರಂಥಾಲಯಗಳ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಹಾಗೂ ಇನ್ನಿತರ ಅಹವಾಲುವನ್ನು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂದೆ ವ್ಯಕ್ತಪಡಿಸಿದ್ದು ತುರ್ತಾಗಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ಮಕ್ಕಳು ನಿರ್ಭಯವಾಗಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ, ಜೆಜೆ ಕಾಯ್ದೆ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಜವಾಬ್ದಾರಿಗಳ ಮತ್ತು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲ್ಯ ಮಂಡಳಿಯ ಕುರಿತು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಯಿತು. ಮಕ್ಕಳು ಉತ್ಸಾಹದಿಂದ ಅಹವಾಲು ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ್ ಮ.ಕರಣ್ಣವರ, ಎಎಸ್ಪಿ ವಿಜಯಕುಮಾರ್ ಎಂ.ಸಂತೋಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ರಾಜ ನಾಯ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಬಾಲ ನ್ಯಾಯ ಮಂಡಳಿ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.