ದಾವಣಗೆರೆ ಡಿ.25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, 2026ರ ಜ. 03ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳೊಂದಿಗೆ ಉಪಚುನಾವಣೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2026 ಜನವರಿ 1 ಕ್ಕೆ ಸಂಬಂಧಿಸಿದಂತೆ 2026ರ ಜ. 3 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು-ಆಕ್ಷೇಪಣೆಗಳಿದ್ದಲ್ಲಿ ಜ. 24 ರೊಳಗೆ ಸಲ್ಲಿಸಬೇಕು. ಅಂತಿಮ ಮತದಾರರ ಪಟ್ಟಿಯನ್ನು 2026 ರ ಫೆ. 14 ರಂದು ಪ್ರಕಟಿಸಲಾಗುವುದು ಎಂದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಡಾ.ಶಾಮನೂರು ಶಿವಶಂಕರಪ್ಪನವರ ನಿಧನದಿಂದ ಕ್ಷೇತ್ರ ತೆರವಾಗಿರುತ್ತದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 113538 ಪುರುಷ, 117479 ಮಹಿಳಾ ಮತದಾರರು ಹಾಗೂ 47 ಇತರೆ ಮತದಾರರು ಸೇರಿದಂತೆ ಒಟ್ಟು 2,31,062 ಮತದಾರಿದ್ದು, ಒಟ್ಟು 217 ಮತಗಟ್ಟಿಗಳನ್ನೊಳಗೊಂಡಿದೆ.
4857 ಯುವ ಮತದಾರರು: ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2497 ಪುರುಷ ಮತ್ತು 2360 ಮಹಿಳಾ ಯುವ ಮತದಾರರಿದ್ದಾರೆ. ಹಾಗೆಯೇ 1395 ಪುರುಷ, 1146 ಮಹಿಳಾ ವಿಶೇಷಚೇತನ ಮತದಾರರು ಸೇರಿದಂತೆ ಒಟ್ಟು 2541 ವಿಶೇಷಚೇತನ ಮತದಾರರಿದ್ದಾರೆ ಎಂದು ತಿಳಿಸಿದರು.
ರಾಷನಲೈಸೇಷನ್ (ಯುಕ್ತೀಕರಣ) ಪ್ರಕ್ರಿಯೆ: ಈ ಕ್ಷೇತ್ರ ವ್ಯಾಪ್ತಿಯಲ್ಲಿನ ಮತಗಟ್ಟೆಗಳ ಭೌತಿಕ ಪರಿಶೀಲನೆ ನಂತರ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು 300ಕ್ಕಿಂತ ಕಡಿಮೆ ಮತದಾರರಿರುವ ಮತ್ತು 1200 ಕ್ಕೂ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಯುಕ್ತೀಕರಣ ಮಾಡಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಾಗಲೇ 67 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಕಟ್ಟಡ ಬದಲಾವಣೆ ಕಾರಣದಿಂದ 24 ಮತಗಟ್ಟೆ ಸ್ಥಳಾಂತರ ಹಾಗೂ 2 ಮತಗಟ್ಟೆಗಳ ಹೆಸರು ಬದಲಾವಣೆ ಸೇರಿದಂತೆ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು ಒಟ್ಟು 284 ಮತಗಟ್ಟೆಗಳನ್ನು ಸ್ಥಾಪನೆ ಮಾಡುವ ಅಗತ್ಯತೆಯ ಕುರಿತಂತೆ ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.
ಕ್ಷೇತ್ರದ ಮತದಾರರು ತಮ್ಮ ಮತಪಟ್ಟಿ ವಿವರಗಳನ್ನು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ಪರಿಶೀಲಿಸಕೊಳ್ಳಬಹುದಾಗಿದೆ. ಮತದಾರರು ವಿಳಾಸ ಬದಲಾವಣೆ, ಜನ್ಮ ದಿನಾಂಕ ತಿದ್ದುಪಡಿ, ಫೋಟೊ ಬದಲಾವಣೆ ಹಾಗೂ ಸ್ಥಳಾಂತರಗೊಂಡಿದ್ದಲ್ಲಿ ನಮೂನೆ-8ರ ಅರ್ಜಿಯನ್ನು ವೋಟರ್ ಹೆಲ್ಪ್ ಲೈನ್ ಮುಖಾಂತರ ಸಲ್ಲಿಸಬಹುದು ಎಂದು ತಿಳಿಸಿದರು.
ಯುವ ಮತದಾರರು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ನಮೂನೆ-6ರ ಅರ್ಜಿಯನ್ನು ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. ಸಾರ್ವಜನಿಕರು ಆನ್ಲೈನ್ https://voters.eci.gov.in/ ಮುಖಾಂತರ ಮತದಾರರ ಪಟ್ಟಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.
