ದಾವಣಗೆರೆ, ಜ.20 : ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ಕಂಡುಕೊಂಡು ಕೆಲಸದಲ್ಲಿ ನಿರ್ಲಕ್ಷತೆ ವಹಿಸದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ. ಎಲ್.ಮೂರ್ತಿ ಅಧಿಕಾರಿಗಳಿಗೆ ಸಲಹೆ ನೀಡಿದರು.
ಮಂಗಳವಾರ ಆಯೋಗದಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ.ಜಾತಿ ಮತ್ತು ಪ.ಪಂಗಡಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರ ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡುವ ಅನುದಾನ ಯಾವ ರೀತಿ ವೆಚ್ಚ ಆಗಿದೆ ಎಂಬುದು ಮುಖ್ಯ ಅಲ್ಲ, ಅದು ಎಷ್ಟು ಜನಕ್ಕೆ ತಲುಪಿದೆ ಎಂಬುದು ಮುಖ್ಯವಾಗಲಿದೆ. ಪೊಲೀಸ್ ಇಲಾಖೆಯಲ್ಲಿ ಜಾತಿ ನಿಂದನೆ ಪ್ರಕರಣಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ಬಂದಿರುತ್ತದೆ. ತಾಲ್ಲೂಕು ಕಚೇರಿಗಳಲ್ಲಿ ಕೆಲಸಗಳು ಆಗುತ್ತಿಲ್ಲವೆಂದು ಜನರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ. ಆದುದರಿಂದ ತಹಶೀಲ್ದಾರರುಗಳು ತಮ್ಮ ಕಚೇರಿಗಳಲ್ಲಿ ಸಾರ್ವಜನಿಕರಿಗೆ ನಿಗದಿಪಡಿಸಿದ ಅವಧಿಯಲ್ಲಿ ಕೆಲಸಗಳನ್ನು ಮಾಡಿಕೊಡುವಂತೆ ತಿಳಿಸಿದರು.
ಅರಣ್ಯ ಇಲಾಖೆಯಿಂದ ಸಸಿಗಳನ್ನು ನೀಡಲಾಗುತ್ತಿದೆ, ಇದನ್ನೆ ವಿಭಿನ್ನವಾಗಿ ಯೋಚನೆ ಮಾಡಿ ಆರ್ಯುವೇದಿಕ್ ಮತ್ತು ಹೊಮಿಯೋಪತಿ ಸಸಿಗಳನ್ನು ವಿತರಿಸಲು ಕ್ರಮವಹಿಸಬೇಕು. ಇದರಿಂದ ಅವರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು, ಆಹಾರದ ಗುಣಮಟ್ಟವನ್ನು ಪರಿಶೀಲಿಸಬೇಕು, ಅಧಿಕಾರಿಗಳು ವಸತಿ ನಿಲ ಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಆಹಾರದ ಗುಣಮಟ್ಟವನ್ನು ಪರಿಶೀಲಿಸಲು ಕ್ರಮವಹಿಸಬೇಕು, ವಸತಿ ನಿಲಯಗಳಲ್ಲಿ ಗಂಭೀರ ರೀತಿಯ ಸಮಸ್ಯೆಗಳು ಬರುತ್ತಿರುತ್ತವೆ. ಅವುಗಳನ್ನು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪರಿಹರಿಸಬೇಕು ಎಂದರು.
ನಗರಸಭೆ, ಪುರಸಭೆಗಳಲ್ಲಿ ಪ.ಜಾತಿ ಮತ್ತು ಪ.ಪಂಗಡಕ್ಕೆ ಮೀಸಲಿಟ್ಟ ಹಣದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗ್ರಂಥಾಲಯಗಳ ಸ್ಥಾಪನೆ, ಲ್ಯಾಪ್ಟಾಪ್ ಗಳನ್ನು ವಿತರಿಸಬೇಕು ಎಂದರು.
ಯಾವುದೇ ಕಾಮಗಾರಿ ಪೂರ್ಣಗೊಂಡ ನಂತರ ಕಾಮಗಾರಿ ನಾಮಫಲಕವನ್ನು ಕಡ್ಡಾಯವಾಗಿ ಹಾಕಬೇಕು ಎಂದು ತಿಳಿಸಿದರು.
Read also : ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ
ನಗರದ ಗಾಂಧಿನಗರದಲ್ಲಿನ ಜಿಲ್ಲಾ ಚಿತಾಗಾರದಲ್ಲಿ ವಿದ್ಯುತ್ ಚಿತಾಗಾರವನ್ನು ಸ್ಥಾಪಿಸಲು ಕಾರ್ಯಾದೇಶ ನೀಡಲಾಗಿದೆ, ಇನ್ನು ಎರಡು ತಿಂಗಳಲ್ಲಿ ಅದು ಕಾರ್ಯ ನಿರ್ವಹಿಸಲಿದೆ. ಜಿಲ್ಲಾಸ್ಪತ್ರೆಯಲ್ಲಿ ಎಂ.ಆರ್.ಐ ಸ್ಕ್ಯಾನಿಂಗ್ ಯಂತ್ರವು ಇನ್ನು ಎರಡು ತಿಂಗಳಲ್ಲಿ ಕಾರ್ಯಾರಂಭ ಮಾಡಲಿದೆ. ಹಾಗೂ 9 ಕೋಟಿ ರೂ. ಗಳ ವೆಚ್ಚದಲ್ಲಿ ಡಾ; ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು 1.5 ಎಕರೆ ನಿವೇಶನವನ್ನು ನೀಡಿದ್ದು ಇದ್ಕಕಾಗಿ ಮೊದಲ ಕಂತಿನ ಅನುದಾನ ರೂ. 5.00 ಕೋಟಿ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸಭೆಗೆ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಆಯೋಗದ ಕಾರ್ಯದರ್ಶಿ ಡಾ.ಹೆಚ್.ಎಸ್. ಶಿವರಾಮ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
