ದಾವಣಗೆರೆ, ಫೆ.09 : ಯಾರಿಗೆ ಇತಿಹಾಸ ಗೊತ್ತಿರಲ್ಲವೋ, ಅವರು ಭವಿಷ್ಯವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂಬ ಬಾಬಾಸಾಹೇಬ್ ಡಾ; ಬಿ.ಆರ್.ಅಂಬೇಡ್ಕರ್ ಅವರ ನುಡಿ ಯಂತೆ, ಪ್ರತಿಯೊಬ್ಬ ಶೋಷಿತ ಸಮುದಾಯದ ವ್ಯಕ್ತಿಯೂ ತನ್ನ ಸಾಮಾಜಿಕ ವ್ಯವಸ್ಥೆ ಮತ್ತು ಇತಿಹಾಸವನ್ನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರಿಗೂ ಕೂಡ ನಮ್ಮ ಸಾಮಾಜಿಕ ವ್ಯವಸ್ಥೆ ಮತ್ತು ಅದರ ಇತಿಹಾಸ ಗೊತ್ತಿರಬೇಕು. ಇಡೀ ಶೋಷಿತ ಸಮಾಜ ನಮ್ಮ ಇತಿಹಾಸ ಮತ್ತು ನಮ್ಮ ಸಾಮಾಜಿಕ ವ್ಯವಸ್ಥೆ ಯನ್ನು ತಿಳಿದುಕೊಳ್ಳುವ ಅಗತ್ಯ ಮತ್ತು ಅನಿವಾರ್ಯ ಇದೆ ಎಂದು ತಿಳಿಸಿದರು.
ನಮ್ಮ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಮಾಡುತ್ತಿದೆ. ಮತ್ತು ಅವಕಾಶಗಳನ್ನು ಒದಗಿಸಿಕೊಡುತ್ತಿದೆ. ಯಾರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿ ದಿದ್ದಾರೆ ಅವರಿಗೆಲ್ಲರಿಗೂ ಶಕ್ತಿ ಕೊಡುತ್ತಕ್ಕಂತಹÀ, ಅವರನ್ನ ಸಬಲೀಕರಣ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಒಟ್ಟು 24.1% ಮೀಸಲಾತಿಯನ್ನು ನೀಡಲು ನಿರ್ಧರಿಸಲಾಗಿದೆ, ಇದರಲ್ಲಿ ಪರಿಶಿಷ್ಟ ಜಾತಿಯವರಿಗೆ 17% ಮತ್ತು ಪರಿಶಿಷ್ಟ ಪಂಗಡದವರಿಗೆ 7% ಮೀಸಲಾತಿ ಸೇರಿದೆ. 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು, ಇಲ್ಲದಿದ್ದರೆ ಮಾಡಿದ ಪ್ರಯತ್ನ ವ್ಯರ್ಥವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದರು.
Read also : ಜೀತಪದ್ದತಿ ಮಾನವೀಯತೆಗೆ ವಿರುದ್ದ ; ಮಹಾವೀರ ಎಂ.ಕರಣ್ಣವರ
ಉದ್ಯೋಗ, ಶಿಕ್ಷಣ, ಆರ್ಥಿಕ ಮತ್ತು ರಾಜಕೀಯ ರಂಗಗಳಲ್ಲಿ ಸಮಾನತೆ ತರುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ, ಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್ನ ಅಡೆತಡೆಗಳು ಎದುರಾಗಿವೆ ಮತ್ತು ಈ ನಿಟ್ಟಿನಲ್ಲಿ ಸ್ವಾಮೀಜಿಯವರು ಸುದೀರ್ಘ ಕಾಲ (257 ದಿನಗಳು) ಪ್ರತಿಭಟನೆ ನಡೆಸಿದ್ದನ್ನು ನಾವು ಕಾಣಬಹುದು ಎಂದು ತಿಳಿಸಿದರು
ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಹಿಂದುಳಿದವರು, ಪರಿಶಿಷ್ಟ ಜಾತಿ, ಪಂಗಡದ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಾರೆ ಇದಕ್ಕಾಗಿ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಬೇಕಾಗಿದೆ. ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಹೆಚ್ಚಾಗಿ ಓದುವ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಹಾಗೂ ಶಿಕ್ಷಕರ ಕೊರತೆಯನ್ನು ನೀಗಿಸಲು ಸರ್ಕಾರ ಗಮನಹರಿಸಲಿದೆ ಎಂದು ತಿಳಿಸಿದರು.
ಬಡವರಿಗೆ ಅನುಕೂಲವಾಗುವಂತೆ ಸರ್ಕಾರಿ ಆಸ್ಪತ್ರೆಗಳನ್ನು ಸುಧಾರಿಸುವುದು ಹಾಗೂ ವಾಲ್ಮೀಕಿ ಮತ್ತು ಅಂಬೇಡ್ಕರ್ ಕಾಲೋನಿಗಳಲ್ಲಿ ’30×40′ ಅಳತೆಯ ನಿವೇಶನಗಳನ್ನು ನೀಡುವ ಮೂಲಕ ವಸತಿ ಸಮಸ್ಯೆ ಬಗೆಹರಿಸುವುದು ತಮ್ಮ ಗುರಿಯಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ, ವಾಲ್ಮೀಕಿ ರತ್ನ ಪ್ರಶಸ್ತಿಯನ್ನು ಹೈಕೋರ್ಟ್ ಹಿರಿಯ ವಕೀಲರಾದ ಎನ್.ವೈ. ಹೆಚ್.ವಿಜಯಕುಮಾರ್ ಹಾಗೂ ಮದಕರಿ ನಾಯಕ ಪ್ರಶಸ್ತಿಯನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿ.ಐ.ಜಿ ರವಿ ಡಿ. ಚನ್ನಣ್ಣನವರ್ ಅವರಿಗೆ ಪ್ರದಾನ ಮಾಡಲಾಯಿತು. ವಾಲ್ಮೀಕಿ ವಿಜಯ ಸಂಪುಟ ಪುಸ್ತಕವನ್ನು ಬಿಡುಗಡೆ ಮಾಡಿದರು.
ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಡಾ; ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.
ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಉಪಸಭಾಪತಿ ರುದ್ರಪ್ಪ ಲಮಾಣಿ, ಲೋಕಸಭಾ ಸದಸ್ಯ ಕುಮಾರ್ ನಾಯಕ್, ಶಾಸಕರಾದ ಟಿ.ಬಿ. ಜಯಚಂದ್ರ, ಎನ್.ವೈ. ಗೋಪಾಲಕೃಷ್ಣ , ವಿಧಾನ ಪರಿಷತ್ ಸದಸ್ಯ ಡಾ; ಯತೀಂದ್ರ, ಸಿರಿಗುಪ್ಪ ಶಾಸಕರಾದ ನಾಗರಾಜ್ ,ಚಳ್ಳಕೆರೆ ಟಿ. ರಘುಮೂರ್ತಿ , ವೇಣುಗೋಪಾಲ ನಾಯಕ್ , ಡಿ.ಜಿ. ಶಾಂತನಗೌಡ , ಬಸವಂತಪ್ಪ, ದೇವೇಂದ್ರಪ್ಪ, ಡಾ; ಶ್ರೀನಿವಾಸ್ ಎನ್.ಟಿ , ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಯೋಗೀಶ್ ಬಾಬು, ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜರಾವ್, ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವ ನಾಯಕ್ ಹಾಗೂ ಅನೇಕ ಮಾಜಿ ಸಚಿವರು, ಶಾಸಕರುಗಳು ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.
