ದಾವಣಗೆರೆ (Davanagere): ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು ಇತ್ಯಾದಿಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ. ನಾವು ಅವಲಂಬಿತರಾಗಿರುವ ಈ ಪರಿಸರ ಯುಗ ಯುಗ ಗಳವರೆಗೂ ಹೀಗೆಯೂ ಉಳಿಯಬೇಕಿದೆ ಎಂದು ಮುಖ್ಯ ಶಿಕ್ಷಕ ಆರ್.ಪ್ರಭು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಹೊಂಡದ ರಸ್ತೆಯಲ್ಲಿರುವ ಶ್ರೀ ದುರ್ಗಾಂಬಿಕಾ ಸಂಯುಕ್ತ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಶನಿವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟು ಅವರು ಮಾತನಾಡಿದರು.
ಬೇಸರವೆಂದರೆ ನಾವು ಮಾಡುತ್ತಿರುವ ಅರಣ್ಯನಾಶ, ಗಣಿಗಾರಿಕೆ, ಕೈಗಾರಿಕೀಕರಣ ಸೇರಿದಂತೆ ಹಲವಾರು ಮಾನವ ಚಟುವಟಿಕೆಗಳಿಂದ ಪರಿಸರವು ಇಂದು ಬಹಳ ಹಾನಿಗೊಳಗಾಗುತ್ತಿದೆ. ಪರಿಸರದೊಂದಿಗೆ ಮಾನವನ ಹಸ್ತಕ್ಷೇಪದಿಂದಾಗಿ ಈ ಹಾನಿಯನ್ನು ಕಡಿಮೆ ಮಾಡುವುದು ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಸಂಸ್ಥೆಯು ವಿಶ್ವ ಪರಿಸರ ದಿನವನ್ನು ಆಚರಿಸುವ ಯೋಚನೆಯೊಂದಿಗೆ ಬಂದಿತು ಎಂದರು.
ಪರಿಸರ ಸಂರಕ್ಷಣೆಗೆ ಯುವಕರನ್ನು ಉತ್ತೇಜಿಸುವ ಸಲುವಾಗಿ ಈ ದಿನವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಚಿತ್ರಕಲೆ ಸ್ಪರ್ಧೆಗಳು, ರಸಪ್ರಶ್ನೆ ಸ್ಪರ್ಧೆಗಳು, ಕಲಾ ಪ್ರದರ್ಶನಗಳು, ಪ್ರಬಂಧ ಬರವಣಿಗೆ, ಭಾಷಣ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತದೆ. ಪ್ರತಿ ವರ್ಷ ವಿಶ್ವ ಪರಿಸರ ದಿನವನ್ನು ನಿರ್ಧಿಷ್ಟ ಥೀಮ್ ನೊಂದಿಗೆ ಆಚರಿಸುತ್ತಾ ಬರಲಾಗಿದೆ ಎಂದರು.
ವಿಶ್ವ ಪರಿಸರ ದಿನದ ಉದ್ದೇಶ ಪ್ಲಾಸ್ಟಿಕ್ ಅನ್ನು ನಿಷೇಧಿಸುವುದು, ಹೆಚ್ಚು ಮರ ಗಿಡಗಳನ್ನು ನೆಡುವುದು, ನೀರನ್ನು ಉಳಿಸುವುದು, ಮರುಬಳಕೆ ಮಾಡುವುದು, ವನ್ಯಜೀವಿಗಳು ಮತ್ತು ಪ್ರಾಣಿಗಳನ್ನು ಉಳಿಸುವುದು, ಇವು ಉತ್ತಮ ಪರಿಸರಕ್ಕೆ ಕಾರಣವಾಗಿದೆ. ನಾವು ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ತಮ್ಮ ಚಟುವಟಿಕೆಗಳ ಬಗ್ಗೆ ಜಾಗೃತರಾಗಿರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಜಾನ್ಸಿ ಲಕ್ಷ್ಮೀ ಮಾತನಾಡಿ, ಮನುಷ್ಯನಿಂದಲ್ಲೇ ಪರಿಸರ ನಾಶವಾಗುತ್ತಿದೆ. ನಮ್ಮ ಪರಿಸರದ ಸುತ್ತಮುತ್ತ ಗಿಡ ಮರಗಳನ್ನು ಬೆಳೆಸು ವುದರ ಮೂಲಕ ಪರಿಸರವನ್ನು ಸಂರಕ್ಷಿಸುವ ಕೆಲಸ ಮಾಡಬೇಕು. ಪ್ರಸ್ತುತ ದಿನದಲ್ಲಿ ಮನುಷ್ಯ ಸ್ವಾರ್ಥಿಯಾಗಿ ಮರಗಳನ್ನು ಕಡಿದು ಮರುಭೂಮಿ ಮಾಡಲು ಹೊರಟ್ಟಿದ್ದಾನೆ. ಪರಿಸರ ನಾಶದಿಂದ ಪ್ರತಿಯೊಬ್ಬರು ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಯುವ ಜನಾಂಗ ಗಿಡನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗ ಬೇಕು. ಗ್ರಾಮದಲ್ಲಿ ಶಿಬಿರಾರ್ಥಿಗಳು ಗಿಡಗಳನ್ನು ನೆಟ್ಟಿದ್ದಾರೆ. ಅದನ್ನು ಪೋಷಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಎಚ್.ಎಸ್. ಶೃತಿ, ಸುದಿನ, ಶಿವಯ್ಯ, ಬಿ.ಎಸ್.ವಿದ್ಯಾ, ಬಿ.ಟಿ.ಮಮತಾ, ಮನು, ಹರೀಶ್, ಪವಿತ್ರ, ಕಲಾವತಿ, ಚೇತನ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.