ದಾವಣಗೆರೆ: ಪ್ರತಿಯೊಂದು ಮಗುವೂ ಹುಟ್ಟುತ್ತಲೇ ವಿಶ್ವಮಾನವ. ಬೆಳೆಯುತ್ತಾ, ಬೆಳೆಯುತ್ತಾ ನಾವು ಆ ಮಗುವನ್ನು ಅಲ್ಪಮಾನವನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಕರೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ವಿರ್ಶವ ಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂತಹ ಮಹನೀಯರ ಜಯಂತಿಗಳಲ್ಲಿ ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರೆ ಅವರಲ್ಲಿ ಜ್ಞಾನದ ಮಟ್ಟ ಹೆಚ್ಚಾಗುತ್ತದೆ. ಈ ಬಗ್ಗೆ ಶಿಕ್ಷಣ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚಿಸುತ್ತೇನೆ. ಅಧಿಕಾರಿಗಳು ಕಾಟಾಚಾರಕ್ಕೆ ಜಯಂತಿಗಳನ್ನು ಆಚರಿಸಬಾರದು, ಅರ್ಥಪೂರ್ಣವಾಗಿ ಜಯಂತಿಗಳನ್ನು ಆಚರಿಸಬೇಕೆಂದು ಸಲಹೆ ನೀಡಿದರು.
ಕುವೆಂಪು ಅವರ ‘ಮನುಜ ಮತ ವಿಶ್ವಪಥ’ ಎಂಬ ವಿಶ್ವಮಾನವ ಸಂದೇಶವನ್ನು ಸಾರಬೇಕಾಗಿದೆ. ಇದು ಮಾನವ ಕುಲದ ಸಮಾನತೆ, ವೈಚಾರಿಕತೆ ಮತ್ತು ಜಾತ್ಯಾತೀತೆಯ ಆಶಯಗಳನ್ನು ಪಸರಿಸುವ ದಿನವಾಗಿದೆ ಎಂದರು.
ರಾಷ್ಟçಕವಿ ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು. ಅವರ ಕಾವ್ಯಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯಕವಾಗಲಿದೆ ಎಂದು ಕಿವಿಮಾತು ಹೇಳಿದರು.
‘ಮಾನವ ತನ್ನ ಮನಸನ್ನು ವಿಶ್ವದಷ್ಟು ವಿಶಾಲವಾಗಿ ಇಟ್ಟುಕೊಳ್ಳಬೇಕು. ಹೃದಯವಂತಿಕೆ, ಸಜ್ಜನಿಕೆ, ಅಭಿಮಾನ, ಪ್ರೀತಿ, ಸಹನೆ ಹಾಗೂ ಕರುಣೆ ಎಲ್ಲವೂ ಮುಖ್ಯ ಎನ್ನುವುದನ್ನು ತಮ್ಮ ಕಾವ್ಯಗಳ ಮೂಲಕ ಕುವೆಂಪು ಅವರು ಜಗತ್ತಿಗೆ ಪರಿಚಯಿಸಿದ್ದಾರೆ. ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಪಾವನವಾಗಲಿದೆ ಎಂದರು.
‘ಸರ್ವಜನಾಂಗ ಶಾಂತಿಯ ತೋಟ’ ರಾಷ್ಟçಕವಿ ಕುವೆಂಪು ಅವರ ಆದರ್ಶಗಳ ಸಾರವಾಗಿದೆ. ಇದನ್ನು ಅವರ ಜನ್ಮದಿನದಂದು ಆಚರಿಸಲಾಗುತ್ತಿದೆ. ಎಲ್ಲಾ ಧರ್ಮ, ಜಾತಿ, ಭಾಷೆಗಳ ಜನರ ನಡುವೆ ಸಾಮರಸ್ಯ, ಸಹಭಾಳ್ವೆ ಮತ್ತು ಏಕತೆಯನ್ನು ಸಾರುತ್ತದೆ. ಕುವೆಂಪು ಅವರು ನೀಡಿರುವ ವಿಶ್ವ ಮಾನವ ಸಂದೇಶವನ್ನು ಇಂದಿನ ಸಮಾಜದಲ್ಲಿ ಪಾಲಿಸಬೇಕಾಗಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ರವಿಚಂದ್ರ, ಹಿರಿಯ ಪತ್ರಕರ್ತ ಬಿ.ಎನ್.ಮಲ್ಲೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಇಂದಿನ ದಿನಗಳಲ್ಲಿ ಅನ್ನ, ಆಚಾರ, ವಿಚಾರ, ಉಡುಪು ಮುಂತಾದ ವಿಷಯಗಳಲ್ಲಿ ಮನಸ್ಸುಗಳನ್ನು ಒಡೆಯುತ್ತಿರುವ ಸಂದರ್ಭದಲ್ಲಿ ಕುವೆಂಪು ಅವರ ‘ವಿಶ್ವ ಮಾನವ ಸಂದೇಶ’ ಮಾನವ ಸಂಕುಲಕ್ಕೆ ಉಳಿದಿರುವ ಏಕೈಕ ದಾರಿ.-ಕೆ.ಎಸ್.ಬಸವಂತಪ್ಪ, ಮಾಯಕೊಂಡ ಶಾಸಕ.

