ದಾವಣಗೆರೆ: ನರೇಗಾ ಕೂಲಿ ಕಾರ್ಮಿಕರು, ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದೇ ಇರುವುದರಿಂದ ಸ್ನೇಹಿತರಲ್ಲಿ, ಸಂಬಂಧಿಕರಲ್ಲಿ ಸ್ವಾಭಿಮಾನ ಅಡವಿಟ್ಟು ಕೈಚಾಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕೇಂದ್ರ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡಬೇಕೆಂದು ಗುರುವಾರ ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೊರಸಂಪನ್ಮೂಲ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಕಳೆದ ಆರೇಳು ತಿಂಗಳಿನಿಂದ ವೇತನ ನೀಡಿಲ್ಲ. ಅಲ್ಲದೇ ಕೂಲಿ ಕಾರ್ಮಿಕರಿಗೂ ಹಣ ಬಿಡುಗಡೆ ಮಾಡಿಲ್ಲ. ಇದನ್ನೇ ನಂಬಿಕೊಂಡು ಜೀವನ ನಡೆಸುವ ಕೂಲಿ ಕಾರ್ಮಿಕರು, ನೌಕರರ ಬದುಕು ಬೀದಿಗೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೂಲಿ ಕಾರ್ಮಿಕರು ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಿ ವಾಸಿಸುವ ಗ್ರಾಮದಲ್ಲೇ ಉದ್ಯೋಗ ನೀಡುವ ಉದ್ದೇಶದಿಂದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ಮಹತ್ವಾಕಾಂಕ್ಷಿ ಯೋಜನೆಯಾದ ‘ಮಹಾತ್ಮಗಾಂಧೀಜಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ’ ಜಾರಿಗೊಳಿಸಿ ಕೂಲಿ ಕಾರ್ಮಿಕರ ಜೀವನಕ್ಕೆ ಆಸರೆಯಾಗಿದ್ದರು. ಅಧಿಕಾರ ನಡೆಸುತ್ತಿರುವ ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರ ಎಲ್ಲೋ ಒಂದು ಕಡೆ ಹಲವಾರು ನಿಬಂಧನೆಗಳನ್ನು ಹಾಕುವ ಮೂಲಕ ಹಂತ ಹಂತವಾಗಿ ಈ ಉದ್ಯೋಗ ಖಾತರಿ ಯೋಜನೆ ಸ್ಥಗಿತಗೊಳಿಸುವ ಹುನ್ನಾರ ನಡೆದಿದೆಯೇ ಎಂಬ ಸಂಶಯ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ದೂರಿದ್ದಾರೆ.
ಮಾಯಕೊಂಡ ಕ್ಷೇತ್ರದಲ್ಲಿ ಬಡ ಕೂಲಿ ಕಾರ್ಮಿಕರೇ ಹೆಚ್ಚಾಗಿದ್ದು, ಉದ್ಯೋಗ ಖಾತರಿ ಯೋಜನೆಯನ್ನು ಅವಲಂಬಿಸಿದ್ದಾರೆ. ಆರೇಳು ತಿಂಗಳಿನಿಂದ ಬಾಕಿ ಹಣ ಉಳಿಸಿಕೊಂಡರೆ ಅವರು ಜೀವನ ನಡೆಸುವುದಾದರೂ ಹೇಗೆ?. ನಾನು ಹಳ್ಳಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೂಲಿ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯ ಹಣ ಬಂದಿಲ್ಲ ಎಂದು ಹೇಳುವ ದೂರುಗಳೇ ಹೆಚ್ಚಾಗಿವೆ. ಇದು ಹೀಗೆಯೇ ಮುಂದುವರಿದರೆ ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಮತ್ತೆ ಗುಳೆ ಹೋಗುವ ಪರಿಸ್ಥಿತಿ ಬರುತ್ತದೆ ಎಂದಿದ್ದಾರೆ.
ಖಾಸಗಿ ಲೇವಾದೇವಿದಾರರಿಂದ ಅನಿವಾರ್ಯವಾಗಿ ಸಾಲ ಮಾಡಿ ಕುಟುಂಬ ನಿರ್ವಹಿಸುವ, ದಿನನಿತ್ಯದ ಆಗು-ಹೋಗುಗಳನ್ನು ನೋಡಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಇದು ನೌಕರ ವರ್ಗದವರನ್ನು ತೀವ್ರ ಮುಜುಗರಕ್ಕೆ ತಳ್ಳುತ್ತಿದೆ. ಅಲ್ಲದೇ ಸಾಲ ಪಡೆದವರ ಎದುರು ತಲೆ ಎತ್ತಿ ನಡೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ನೌಕರರ ಬಾಕಿ ವೇತನ, ಕೂಲಿ ಕಾರ್ಮಿಕರ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.