ದಾವಣಗೆರೆ : ಜಿಲ್ಲೆಯಲ್ಲಿ ನಿರಂತರವಾಗಿ ಮಾದಕ ವಸ್ತುಗಳ ಅಕ್ರಮ ಸಂಗ್ರಹ, ಸಾಗಾಟ ಮತ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ಜಾಕೀರ್ (55) ಎಂಬಾತನನ್ನು ಎನ್ಡಿಪಿಎಸ್ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶೇಖರ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ತಡೆಗಟ್ಟುವ ನಿಟ್ಟಿನಲ್ಲಿ ಪೂರ್ವ ವಲಯದ ಜಿಲ್ಲೆಗಳಲ್ಲೇ ಇಂತಹ ಕಾಯ್ದೆಯಡಿ ದಾಖಲಾದ ಮೊದಲ ಪ್ರಕರಣ ಇದಾಗಿದೆ ಎಂದು ತಿಳಿಸಿದರು.
ಆರೋಪಿ ಜಾಕೀರ್ ವಿರುದ್ಧ ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ಆರು ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯವು ಈಗಾಗಲೇ ದಂಡ ಮತ್ತು ಶಿಕ್ಷೆ ವಿಧಿಸಿದೆ. ಉಳಿದ ಎರಡು ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದರೂ, ಈತ ತನ್ನ ಪ್ರವೃತ್ತಿಯನ್ನು ಮುಂದುವರಿಸಿದ್ದರಿAದ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು ಪಿಐಟಿ ಎನ್ಡಿಪಿಎಸ್ ಕಾಯ್ದೆ 1988ರ ಕಲಂ 3(1)ರ ಅನ್ವಯ ಈತನನ್ನು ಬಂಧನದಲ್ಲಿಡಲು ಆದೇಶಿಸಿದ್ದರು. ಅದರಂತೆ ಫೆಬ್ರವರಿ 25ರಂದು ಆರೋಪಿಯನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿದೆ ಎಂದರು.
ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತೆಸೆಯುವ ಉದ್ದೇಶದಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಸಂತೇಬೆನ್ನೂರು ಸಿಪಿಐ ಮಲ್ಲಮ್ಮ ಚೌಬೆ, ಪಿಎಸ್ಐ ಜಗದೀಶ್ ಮತ್ತು ಸಿಬ್ಬಂದಿಯ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದೆ ಎಂದು ಎಸ್ಪಿ ತಿಳಿಸಿದರು.
