ದಾವಣಗೆರೆ : ಸಮುದಾಯದ ಯುವಕರು ಸಂವಿಧಾನದ ಆಶಯಗಳ ಬಗ್ಗೆ ತಿಳಿದುಕೊಳ್ಳುವುದು ತುಂಬಾ ಅವಶ್ಯಕತೆ ಇದೆ ಎಂದು ಚಿತ್ರದುರ್ಗದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.
ಬೆಂಗಳೂರಿನ ಭಾರತದ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆ, ತರಬೇತಿ ಕೇಂದ್ರದಲ್ಲಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಸಾಮಾಜಿಕ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರ, ಶ್ರೀಜಗದ್ಗುರ ಸಿದ್ದರಾಮೇಶ್ವರ ಮಹಾಸಂಸ್ಥಾನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ನ್ಯಾಯ ನಾಯಕತ್ವ ತರಬೇತಿಯ ಎರಡು ದಿನಗಳ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ನಾವುಗಳು ಎಷ್ಟೇ ದೊಡ್ಡ ಮಟ್ಟದಲ್ಲಿ ಬೆಳೆದರೂ ಸಹ ಸಮಾಜದಲ್ಲಿ ಪ್ರತಿದಿನ ನೆಡೆಯುವ ವಿದ್ಯಾಮಾನಗಳ ಬಗ್ಗೆ ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ ಮತ್ತು ಈ ಎರಡು ದಿನದ ಕಾರ್ಯಾಗಾರದಲ್ಲಿ ನಡೆಯುವಂತಹ ವಿವಿಧ ವಿಷಯಗಳ ಕುರಿತು ತಿಳಿದುಕೊಳ್ಳುವ ಮನಸ್ಸು ನಮ್ಮದಾಗಬೇಕು ಜೊತೆಗೆ ನಾವು ಕಲಿತುಕೊಂಡಿದ್ದನ್ನು ಬೇರೆಯವರಿಗೆ ಅದನ್ನು ತಿಳಿಸುವಂತಹ ಕೆಲಸ ನಾವುಗಳು ಮಾಡಬೇಕು ಆಗ ನಮುದಾಯದ ಅಭಿವೃದ್ಧಿ ಆಗುತ್ತದೆ ಎಂದು ಸಮುದಾಯದ ಯುವಕ ಯುವತಿಯರಿಗೆ ಮತ್ತು ಮುಖಂಡರಿಗೆ ಕಿವಿ ಮಾತು ಹೇಳಿದರು.
ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ಮಾತನಾಡಿ, ಸಾಮಾಜಿಕ, ಶೈಕ್ಷಣಿಕ ಹಾಗೂ ಕಾನೂನಾತ್ಮಕ ಮಾಹಿತಿಯ ಕೊರತೆಯಿಂದಾಗಿ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿಯೇ, ಸಮುದಾಯದೊಳಗೆ ಸಾಮಾಜಿಕ ನ್ಯಾಯದ ಅರಿವು, ಕಾನೂನು ತಿಳುವಳಿಕೆ ಮತ್ತು ನಾಯಕತ್ವ ಕೌಶಲ್ಯಗಳನ್ನು ಬೆಳೆಸುವ ಅಗತ್ಯವಿದೆ ಎಂದರು
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಭೋವಿ ಸಮುದಾಯದ ಯುವಜನರು ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ಸಂವಿಧಾನ ಮತ್ತು ಸಾಮಾಜಿಕ ನ್ಯಾಯ ಸಂಬಂಧಿತ ಕಾನೂನುಗಳ ಬಗ್ಗೆ ಸಮಗ್ರ ಅರಿವು ಮೂಡಿಸುವ ಉದ್ದೇಶದಿಂದ ಎರಡು ದಿನಗಳ ನಾಲ್ಕು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
Read also : ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಸಲಹೆ
ಕಾರ್ಯಾಗಾರದ ಮುಖ್ಯ ಉದ್ದೇಶಗಳು ಸಂವಿಧಾನಾತ್ಮಕ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯದ ಕಾನೂನುಗಳ ಕುರಿತು ಸಮುದಾಯದ ಯುವಜನರಲ್ಲಿ ಅರಿವು ಮೂಡಿಸುವುದು. ಶಿಕ್ಷಣ, ಆರೋಗ್ಯ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಸಂವಿಧಾನಾತ್ಮಕ ದೃಷ್ಟಿಕೋನದಿಂದ ಅರ್ಥಮಾಡಿಕೊಳ್ಳಲು ಸಹಾಯ ಮಾಡುವುದು. ಸರ್ಕಾರದ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಾದ ಮಾಹಿತಿ ನೀಡುವುದು ಕಾನೂನುಗಳ ಅನುಷ್ಠಾನದಲ್ಲಿ ಎದುರಾಗುವ ಸವಾಲುಗಳು ಹಾಗೂ ಅವುಗಳಿಗೆ ಪರಿಹಾರ ಮಾರ್ಗಗಳನ್ನು ವಿವರಿಸುವುದು ಸ್ಥಳೀಯ ಮಟ್ಟದಲ್ಲಿ ಸಮುದಾಯದ ಸಮಸ್ಯೆಗಳಿಗೆ ಮಾರ್ಗದರ್ಶನ ನೀಡುವ ಸಾಮಾಜಿಕ ನಾಯಕತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರ ನಾಯಕ್ ಯು, ಮಾಜಿ ಸಚಿವ ಅರವಿಂದ ಲಿಂಬಾವಳಿ, ಯುವ ಮುಖಂಡರಾದ ರವಿ ಪೂಜಾರಿ, ಗೋವಿಂದಪ್ಪ ಉಪಸ್ಥಿತರಿದ್ದರು.
