ದಾವಣಗೆರೆ (Davanagere) : ಅತಿಸಾರ ಭೇದಿ ಸಾಮಾನ್ಯ ಖಾಯಿಲೆ ಅಲ್ಲ, ಇದು ತುಂಬಾ ಗಂಭೀರವಾದ ಖಾಯಿಲೆ. ಆದ್ದರಿಂದ ಅತಿಸಾರ ಭೇದಿ ತಡೆಯುವಲ್ಲಿ ಪ್ರತಿಯೊಬ್ಬರಲ್ಲಿ ಅರಿವು ಅಗತ್ಯ. ಅತಿಸಾರ ಭೇದಿಯ ನಿಯಂತ್ರಣ ಮತ್ತು ತಡೆಯುವಿಕೆ ಕುರಿತು ಸ್ವಚ್ಛತೆ, ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದರು.
ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅತಿಸಾರ ತಡೆಗಟ್ಟೋಣ, ಸ್ವಚ್ಚತೆ ಮತ್ತು ಓಆರ್ಎಸ್ ಮೇಲೆ ಇರಲಿ ಗಮನ ಎಂಬ ಘೋಷವಾಕ್ಯದೊಂದಿಗೆ ಅತಿಸಾರ ತಡೆಗಟ್ಟುವ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ಅತಿಸಾರಕ್ಕೆ ಮುಖ್ಯ ಕಾರಣ ಸ್ವಚ್ಛತೆ ಇಲ್ಲದೇ ಇರುವುದೇ ಆಗಿದೆ. ಚಿಕ್ಕ ಮಕ್ಕಳನ್ನು ನೆಲದ ಮೇಲೆ ಆಟ ಹಾಡಲು ಬಿಡುವುದು, ಕೈಯಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ಅತಿಯಾದ ಕಾರಣ. ನೊಣವಿಲ್ಲದ ಮನೆ ಯಾವಾಗಲೂ ಆರೋಗ್ಯವಾಗಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಮನೆಯ ಮುಂದಿನ ಚರಂಡಿಯನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಗ್ರಾಮ ಪಂಚಾಯಿತಿಯ ಸಿಬ್ಬಂದಿಯವರು ಬಂದು ಚರಂಡಿ ಸ್ವಚ್ಚಗೊಳಿಸಬೇಕೆಂದು ಕಾಯಬಾರದು, ಇದರಿಂದ ಸೊಳ್ಳೆ ನೊಣ ಹೆಚ್ಚಾಗುತ್ತವೆ. ಚಿಕ್ಕ ಮಕ್ಕಳಲ್ಲಿ ಸಾಮಾನ್ಯವಾಗಿ ಪದೇ ಪದೇ ಅತಿಸಾರ ಭೇದಿ ಉಂಟಾಗುತ್ತದೆ. ಆದ್ದರಿಂದ ಅತಿಸಾರ ತಡೆಯುವಲ್ಲಿ ಪ್ರತಿಯೊಬ್ಬರಲ್ಲಿಯೂ ಅರಿವು ಅಗತ್ಯ. ಊಟಕ್ಕಿಂತ ಮೊದಲು ಕಡ್ಡಾಯವಾಗಿ ಸಾಬೂನಿನಿಂದ ಕೈತೊಳೆದು ಊಟ ಮಾಡಬೇಕು. ಶುಚಿತ್ವ ಇದ್ದರೆ ನಮ್ಮ ಸುಮಾರು ಹಣ ಉಳಿತಾಯ ಮಾಡಿದಂತೆ ಆಗುತ್ತದೆ ಎಂದರು.
Read also : ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಮಾತನಾಡಿ ಮಳೆಗಾಲದಲ್ಲಿ ಅತಿಸಾರ ಭೇದಿ ನೀರಿನಲ್ಲಿ ಸೇರಿರುತ್ತದೆ. ಬಿಸಿಯೂಟ ಸೇವಿಸಬೇಕು, ದಾರಿಯಲ್ಲಿ ಮಾರುವ ಪದಾರ್ಥಗಳನ್ನು ಸೇವಿಸಬಾರದು. ಡೆಂಗ್ಯೂ ನಿಯಂತ್ರಣಕ್ಕೆ ಹೆಚ್ಚಿನ ಜಾಗೃತಿ ಮೂಡಿಸಿ ಸುತ್ತಮುತ್ತಲಿನ ಪರಿಸರ ಶುಚಿತ್ವ ಅತೀ ಮುಖ್ಯ. ಟೈರು, ತೆಂಗಿನ ಚಿಪ್ಪು, ಡಬ್ಬಿಯಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪಾದನೆಯಾಗದಂತೆ ಗಮನಹರಿಸಬೇಕು. ಚರಂಡಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು ಎಂದರು. ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ನೀರಿನ ಟ್ಯಾಂಕ್ಗಳನ್ನು ಶುಚಿಗೊಳಿಸುವುದು ಸಹ ಅತೀ ಮುಖ್ಯವಾಗಿದೆ ಎಂದು ಅವರು ಹೇಳಿದರು.
ಅತಿಸಾರ ತಡೆಗಟ್ಟು ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅತಿಸಾರ ಭೇದಿ ತಡೆಗಟ್ಟುವಿಕೆ ಅಭಿಯಾನವು ಈಗಾಗಲೇ ಆರಂಭವಾಗಿದೆ. ಜುಲೈ 31ರವರೆಗೆ ಸಮುದಾಯ ಮತ್ತು ಗ್ರಾಮೀಣ ಮಟ್ಟದಲ್ಲಿ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.
ಅತಿಸಾರ ಭೇದಿ ತಡೆಯುವಿಕೆ ಅಭಿಯಾನದಡಿ ಸಮುದಾಯ ಮತ್ತು ಗ್ರಾಮಮಟ್ಟದಲ್ಲಿ ಓಆರ್ಎಸ್ ಹಂಚುವುದು ಮತ್ತು ಅದನ್ನು ತಯಾರಿಸುವ ವಿಧಾನದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದರು.
ಜಿಲ್ಲಾ ಸರ್ಜನ್ ಡಾ.ನಾಗೇಂದ್ರಪ್ಪ.ಎಂ.ಬಿ, ಆರ್.ಸಿ.ಹೆಚ್ ಡಾ.ರೇಣುಕಾರಾಧ್ಯ, ಡಾ.ಮೃತ್ಯುಂಜಯ ಉಪಸ್ಥಿತರಿದ್ದರು.